ಪತ್ರಿಕೆಗಳ ಟೀಕೆ ರಚನಾತ್ಮಕವಾಗಿರಬೇಕು: ಸಚಿವ ಕೆ.ಜೆ.ಜಾರ್ಜ್* - *ಮಾಧ್ಯಮಗಳು ರಾಜಕೀಯ ರಂಗ, ಆಡಳಿತ ವರ್ಗವನ್ನು ಎಚ್ಚರಿಸುವ ಕೆಲಸ ಮಾಡಬೇಕು*
*ಪತ್ರಿಕೆಗಳ ಟೀಕೆ ರಚನಾತ್ಮಕವಾಗಿರಬೇಕು: ಸಚಿವ ಕೆ.ಜೆ.ಜಾರ್ಜ್*
- *ಮಾಧ್ಯಮಗಳು ರಾಜಕೀಯ ರಂಗ, ಆಡಳಿತ ವರ್ಗವನ್ನು ಎಚ್ಚರಿಸುವ ಕೆಲಸ ಮಾಡಬೇಕು*
- *ಚಿಕ್ಕಮಗಳೂರು ಪ್ರೆಸ್ ಕ್ಲಬ್ ವತಿಯಿಂದ ಪತ್ರಿಕಾ ದಿನಾಚರಣೆ*
*ಚಿಕ್ಕಮಗಳೂರು, ಜು.5, 2025*: ಪತ್ರಿಕಾ ರಂಗವು ರಚನಾತ್ಮಕ ಟೀಕೆ, ಟಿಪ್ಪಣಿಗಳ ಮೂಲಕ ರಾಜಕೀಯ ಮತ್ತು ಆಡಳಿತ ವರ್ಗವನ್ನು ಎಚ್ಚರಿಸುವ ಕೆಲಸ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಜವಾಬ್ದಾರಿಯನ್ನೂ ಹೊಂದಿರುವ ಇಂಧನ ಸಚಿವ ಕೆ.ಜೆ. ಜಾರ್ಜ್ ಹೇಳಿದ್ದಾರೆ.
ನಗರದ ಸ್ಕೌಟ್ ಭವನದಲ್ಲಿ ಚಿಕ್ಕಮಗಳೂರು ಪ್ರೆಸ್ ಕ್ಲಬ್ ವತಿಯಿಂದ ಶನಿವಾರ ಆಯೋಜಿಸಿದ್ದ ಪತ್ರಿಕಾ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, "ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗದ ಜತೆಗೆ ಪತ್ರಿಕಾ ರಂಗವೂ ಒಂದಾಗಿದೆ. ರಚನಾತ್ಮಕ ಟೀಕೆ, ಟಿಪ್ಪಣಿಗಳ ಮೂಲಕ ರಾಜಕೀಯ ರಂಗ, ಆಡಳಿತ ವರ್ಗವನ್ನು ಎಚ್ಚರಿಸಿ ಸರಿದಾರಿಗೆ ತರುವ ಕೆಲಸವನ್ನು ನಿರಂತರವಾಗಿ ಮಾಡಿಕೊಂಡು ಬರುತ್ತಿದೆ," ಎಂದರು.
"ಪತ್ರಿಕಾ ವಲಯದಿಂದ ರಚನಾತ್ಮಕ ಟೀಕೆ, ಟಿಪ್ಪಣಿಗಳು ಆ ಕ್ಷಣಕ್ಕೆ ನೋವುಂಟು ಮಾಡಿದರೂ ಅವುಗಳನ್ನು ಸಕರಾತ್ಮಕವಾಗಿ ತೆಗೆದುಕೊಳ್ಳುವುದರಿಂದ ಸಮಾಜಕ್ಕೆ ಒಳ್ಳೆಯದಾಗುತ್ತದೆ. ಸಮಸ್ಯೆಗಳನ್ನು ಗುರುತಿಸಿ ಪರಿಹರಿಸಲು ಸಾಧ್ಯವಾಗುತ್ತದೆ. ತಮ್ಮ ರಾಜಕೀಯ ಜೀವನದಲ್ಲಿ ಅನೇಕ ಪತ್ರಕರ್ತರು ತಮಗೆ ಮಾರ್ಗದರ್ಶನ ನೀಡಿದ್ದಾರೆ," ಎಂದು ಸ್ಮರಿಸಿದರು.
ವಿವಿಧ ಪತ್ರಿಕೆಗಳಲ್ಲಿ ಕಾರ್ಯನಿರ್ವಹಿಸಿದ ಅನೇಕ ಹಿರಿಯರು ತಮಗೆ ಮಾರ್ಗದರ್ಶನ ನೀಡಿದ್ದಾರೆ ಎಂದು ಹೇಳಿದ ಸಚಿವರು, ಪತ್ರಿಕಾ ರಂಗ ಸಮಾಜಕ್ಕೆ ನೀಡಿದ ಕೊಡುಗೆಗಳನ್ನು ಶ್ಲಾಘಿಸಿದರು.
"ಯುವಶಕ್ತಿ ಈ ದೇಶದ ಸಂಪತ್ತು. ಯುವ ಶಕ್ತಿಯನ್ನು ಸಮರ್ಪಕವಾಗಿ ಬಳಸಿಕೊಂಡಲ್ಲಿ ದೇಶ ಅಭಿವೃದ್ಧಿ ಸಾಧಿಸಲು ಸಾಧ್ಯವಾಗುತ್ತಿದೆ. ಇಂದು ಸಾಕಷ್ಟು ವಿದ್ಯಾವಂತರು ಉದ್ಯೋಗ ದೊರೆಯದೆ ಸಮಸ್ಯೆ ಎದುರಿಸುತ್ತಿದ್ದಾರೆ. ವಿದ್ಯಾವಂತರಿಗೆ ಉದ್ಯೋಗ ಸೃಷ್ಠಿಸುವುದು ಕೇಂದ್ರ ಮತ್ತು ರಾಜ್ಯ ಸರ್ಕಾರದ ಜವಬ್ದಾರಿಯಾಗಿದೆ. ರಾಜ್ಯ ಸರ್ಕಾರ ಉದ್ಯೋಗ ಸೃಷ್ಠಿಗೆ ಶ್ರಮಿಸುತ್ತಿದೆ," ಎಂದು ಹೇಳಿದರು.
"ರಾಜ್ಯದಲ್ಲಿ ವಿದ್ಯುತ್ಗೆ ಭಾರೀ ಬೇಡಿಕೆ ಇದ್ದು, ಈ ನಿಟ್ಟಿನಲ್ಲಿ ಇಂಧನ ಇಲಾಖೆ ಕುಸುಮ್ ಯೋಜನೆ ಸೇರಿದಂತೆ ಇತರೆ ಯೋಜನೆಯಡಿಯಲ್ಲಿ 110 ಕೋಟಿ ರೂ. ವೆಚ್ಚದಲ್ಲಿ 2500 ಮೆಗಾ ವ್ಯಾಟ್ ಉತ್ಪಾದನೆಗೆ ಚಾಲನೆ ನೀಡಲಾಗಿದೆ. ಇದರಿಂದ ರಾಜ್ಯದ ರೈತರಿಗೆ ಅನುಕೂಲವಾಗಲಿದೆ," ಎಂದು ತಿಳಿಸಿದರು.
ಶಾಸಕ ಎಚ್.ಡಿ.ತಮ್ಮಯ್ಯ,
ವಿಧಾನ ಪರಿಷತ್ ಸದಸ್ಯರಾದ ಸಿ.ಟಿ.ರವಿ, ಎಸ್.ಎಲ್. ಭೋಜೇಗೌಡ, ಜಿಲ್ಲಾಧಿಕಾರಿ ಸಿ.ಎನ್.ಮೀನಾ ನಾಗರಾಕ್, ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಚ್.ಎಸ್. ಕೀರ್ತನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ವಿಕ್ರಮ್ ಅಮಟೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಅಧಿಕಾರಿ ಮಂಜೇಗೌಡ,
ಚಿಕ್ಕಮಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ರಾಜೇಶ್, ಪ್ರಧಾನ ಕಾರ್ಯದರ್ಶಿ ಆರ್. ತಾರಾನಾಥ್ ಮತ್ತಿತರರು ಪಾಲ್ಗೊಂಡಿದ್ದರು.

Comments
Post a Comment